✒️..ಅಮಿತ್ ಆರ್ ಆನಂದಪುರ
ಆನಂದಪುರ, ಜೂ.15: ಶಾಲಾ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಮಕ್ಕಳ ಜೀವ ಹಾಗೂ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಶಾಲಾ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಖಡಕ್ ಎಚ್ಚರಿಕೆ ನೀಡಿದರು.
ಶಾಲಾ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ವಿವಿಧ ಶಾಲೆಗಳ ಬಸ್ಗಳನ್ನು ಠಾಣೆಗೆ ಕರೆಸಿ ವಿಶೇಷ ತಪಾಸಣೆ ನಡೆಸಿ ಅವರು ಮಾತನಾಡಿದರು.
ಪ್ರತಿ ದಿನ ನೂರಾರು ವಿದ್ಯಾರ್ಥಿಗಳು ಶಾಲಾ ವಾಹನಗಳ ಮೂಲಕ ಶಾಲೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ಸುರಕ್ಷತಾ ಕ್ರಮಗಳು ಸಮರ್ಪಕವಾಗಿರುವುದು ಅತ್ಯಗತ್ಯವಾಗಿದೆ. ಶಾಲಾ ವಾಹನಗಳ ಚಾಲಕರು ಹಾಗೂ ನಿರ್ವಾಹಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅತಿವೇಗದ ಚಾಲನೆ, ಮೊಬೈಲ್ ಬಳಕೆ, ನಿರ್ಲಕ್ಷ್ಯದ ಚಾಲನೆ ಹಾಗೂ ನಿಗದಿತ ಮಿತಿಗಿಂತ ಹೆಚ್ಚಿನ ವಿದ್ಯಾರ್ಥಿಗಳ ಸಾಗಣೆಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಶಾಲಾ ವಾಹನಗಳಲ್ಲಿ ಅಗತ್ಯ ದಾಖಲೆಗಳ ಕೊರತೆ, ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ಮಕ್ಕಳ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ವಾಹನ ಮಾಲೀಕರು, ಚಾಲಕರು ಹಾಗೂ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಕಠಿಣ ಕ್ರಮ
ಯಾವುದೇ ಕಾರಣಕ್ಕೂ ಶಾಲಾ ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಡ್ರಿಂಕ್ ಅಂಡ್ ಡ್ರೈವ್ ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಚಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪಿಎಸ್ಐ ಪ್ರವೀಣ್ ಸ್ಪಷ್ಟಪಡಿಸಿದರು.
ಮುಂದಿನ ದಿನಗಳಲ್ಲಿಯೂ ಶಾಲಾ ಮಕ್ಕಳ ಸುರಕ್ಷತೆಗಾಗಿ ಇಂತಹ ತಪಾಸಣಾ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಬಸ್ಗಳ ಫಿಟ್ನೆಸ್ ಪ್ರಮಾಣಪತ್ರ, ವಿಮೆ, ಚಾಲನಾ ಪರವಾನಗಿ ಹಾಗೂ ಇತರೆ ವಾಹನ ದಾಖಲೆಗಳನ್ನು ಪರಿಶೀಲಿಸಲಾಯಿತು. ಜೊತೆಗೆ ಅಗ್ನಿಶಾಮಕ ಸಾಧನ, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ತುರ್ತು ನಿರ್ಗಮನ ವ್ಯವಸ್ಥೆ ಸೇರಿದಂತೆ ವಿವಿಧ ಸುರಕ್ಷತಾ ಸೌಲಭ್ಯಗಳ ಕುರಿತು ವೃತ್ತಿಪರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನಿಲ್ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿದ್ದಾರೂಡ, ದೇವಿದಾಸ್, ನಿರಂಜನ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಶಾಲೆಗಳ ವಾಹನ ಚಾಲಕರು ಮತ್ತು ನಿರ್ವಾಹಕರು ಉಪಸ್ಥಿತರಿದ್ದರು.
















