ಆನಂದಪುರ: ಸುದೀರ್ಘ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ಸಾವಿರಾರು ಮಕ್ಕಳಿಗೆ ಅಕ್ಷರದ ಬೀಜ ಬಿತ್ತಿದ ನಿವೃತ್ತ ಶಿಕ್ಷಕಿ ಚಂದ್ರಕಲಾ ಅವರನ್ನು ಶಿಕ್ಷಕರ ದಿನಾಚರಣೆ ಅಂಗವಾಗಿ ಕನ್ನಡ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಂಘದ ಅಧ್ಯಕ್ಷ ಚಂದ್ರಕುಮಾರ್ ಮಾತನಾಡಿ, “ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು. ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಮೌಲ್ಯಗಳನ್ನು ನೀಡಿದ ನಿವೃತ್ತ ಶಿಕ್ಷಕಿಯವರ ಸೇವೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಶಿಕ್ಷಕರ ದಿನಾಚರಣೆ ಅಂಗವಾಗಿ ಅವರನ್ನು ಸನ್ಮಾನಿಸುವ ಮೂಲಕ ಅವರ ಶೈಕ್ಷಣಿಕ ಸೇವೆಗೆ ಗೌರವ ಸಲ್ಲಿಸುತ್ತಿದ್ದೇವೆ. ಅವರ ಮಾರ್ಗದರ್ಶನ ಮತ್ತು ಸೇವಾ ಮನೋಭಾವ ಯುವ ಪೀಳಿಗೆಗೆ ಸದಾ ಪ್ರೇರಣೆಯಾಗಲಿ” ಎಂದರು.

ಸನ್ಮಾನ ಸ್ವೀಕರಿಸಿದ ನಿವೃತ್ತ ಶಿಕ್ಷಕಿ ಚಂದ್ರಕಲಾ ಮಾತನಾಡಿ, “ಶಿಕ್ಷಕರ ದಿನಾಚರಣೆ ಅಂಗವಾಗಿ ಕನ್ನಡ ಸಂಘದ ವತಿಯಿಂದ ನೀಡಿದ ಈ ಗೌರವ ನನಗೆ ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಸುದೀರ್ಘ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಅನುಭವ ನನ್ನ ಜೀವನದ ಅಮೂಲ್ಯ ನೆನಪು. ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಧನೆಯನ್ನು ಕಂಡಾಗ ಶಿಕ್ಷಕ ವೃತ್ತಿ ಆಯ್ಕೆ ಮಾಡಿಕೊಂಡಿದ್ದಕ್ಕೆ ಹೆಮ್ಮೆ ಎನಿಸುತ್ತದೆ. ನನ್ನ ಸೇವೆಯನ್ನು ಗುರುತಿಸಿ ಗೌರವಿಸಿದ ಕನ್ನಡ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ರಾಜೇಂದ್ರ ಗೌಡ ಹಾಗೂ ಮಾಜಿ ಅಧ್ಯಕ್ಷರುಗಳಾದ ಉಮೇಶ್, ಕೆ.ಟಿ. ತಿಮ್ಮೇಶ್, ಸುರೇಶ್ ನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು












